ಸೂಲಿಬೆಲೆ : ಗ್ರಾಮೀಣ ಭಾಗದ ಸರಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ವೈಜ್ಞಾನಿಕ ಸಂಶೋಧನಾ ಪರಿಷತ್ ಆನೇಕ ಶೈಕ್ಷಣಿಕ ಕರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ವೈಜ್ಞಾನಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಆರ್. ಉಮೇಶ್ ಅಭಿಪ್ರಾಯಪಟ್ಟರು.
ಸೂಲಿಬೆಲೆ ಸರಕಾರಿ ಪ್ರಾಥಮಿಕ ಉರ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ವಿಜ್ಞಾನ ಹಾಗೂ ತಂತ್ರಜ್ಞಾನದ ಸಾಧನಗಳನ್ನು ಸದ್ಬಳಕೆ ಮಾಡಿಕೊಂಡು ಹೊಸ ಆವಿಷ್ಕಾರಗಳತ್ತ ಮುಂದಾಗಬೇಕು. ವೈಜ್ಞಾನಿಕ ಪರಿಷತ್ವತಿಯಿಂದ ವಿವಿಧ ಶಾಲೆಯ ಸುಮಾರು ೨ ಸಾವಿರ ಮಕ್ಕಳಿಗೆ ಸವಲತ್ತುಗಳನ್ನು ವಿತರಿಸಿದೆ.ಗ್ರಾಮೀಣ ಭಾಗದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ತಾಲೂಕು ಅಧ್ಯಕ್ಷ ರವಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿಯೂ ಸರಕಾರ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿದ್ದು, ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಪೋಷಕರು ಶಾಲೆ ಮತ್ತು ಮಕ್ಕಳ ನಡುವೆ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸಿ ಮಕ್ಕಳ ಶೈಕ್ಷಣಿಕ ಸಾಧನೆಗೆ ಬೆಂಬಲ ನೀಡಬೇಕು. ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಸಮಾನವಾಗಿ ಶಿಕ್ಷಣ ನೀಡಬೇಕು ಹಾಗೂ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದಿನ ಪರೀಕ್ಷೆಗಳನ್ನು ಎದುರಿಸಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಮಕ್ಕಳು ಕಲಿಕೆಯ ಅಡಿಪಾಯ ಬಲಿಷ್ಟವಾಗಬೇಕು ಶಿಕ್ಷಕರು ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವೈಜ್ಞಾನಿಕ ಸಂಶೋಧನಾ ಪರಿಷತ್ ಹೋಬಳಿ ಅಧ್ಯಕ್ಷ ನಯಾಜ್ ಖಾನ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ವೆಂಕಟೇಶ್, ಮಾನವ ಹಕ್ಕುಗಳ ಜಾಗೃತಿ ಸಮಿತಿ ಮಹಿಳಾ ಅಧ್ಯಕ್ಷೆ ರಾಜೇಶ್ವರಿ, ಸಹಕಾರ ಬ್ಯಾಂಕ್ ಸಿಇಒ ವಸಂತ್ , ಜೇನುಗೂಡು ಟ್ರಸ್ಟ್ ಸಂಸ್ಥಾಪಕ ಬೆಟ್ಟಹಳ್ಳಿ ಗೋಪಿನಾಥ್, ನಿರ್ದೇಶಕ ಸೈಯದ್ ಮೆಹಬೂಬ್ ಸೇರಿದಂತೆ ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

